Oct 13, 2021

ಸುಬ್ರಾಯ ಶೆಟ್ರು


ಬೇರೆವರ ಟೀಕೆ ಟಿಪ್ಪಣಿಗೆ ನಾವು ಎಲ್ಲಾ ಸಲ ತಲೆಬಾಗವು ಅಥವ ತಿದ್ಕಳವು ಹೇಳಿಲ್ಲೆ. ನಮ್ಮ ನಮ್ಮ ಅಭಿಪ್ರಾಯದಂತೇ ಬದುಕವು ನಾವು ಅಲ್ದ?

ವಂದು ನಿಜ ಘಟನೆ ನೆನಪಾತು.. ನಾ ಶಾಲೆಗೆ ಹೋಗಕಾರಿನ ಘಟನೆ ..

ಸುಬ್ರಾಯ ಶೆಟ್ಟಿ ಹೇಳಿ ಆಗಿನ ಕೆಎಸ್ಸಾರ್ಟೀಸಿಯ ವಬ್ಬ ಪ್ರಾಮಾಣಿಕ ಡ್ರೈವರ...  ತನ್ನ ವೃತ್ತಿ ಜೀವನದ ಕೊನೆಯಲ್ಲಿದಿದ್ದ. ಅವನ ಇಡೀ ವೃತ್ತಿ ಜೀವನದಲ್ಲಿ ಯಾವುದೇ ತಪ್ಪು ಮಾಡದ ಸರ್ಕಾರಿ ಸೇವಕ ಅಂವ (ಅವನ್ನ ನೌಕರ ಹೇಳಿರೆ ಅದು ಅವಂಗೆ ಅಗೌರವ ಆಗತು)  ಜೀವಮಾನದಲ್ಲಿ ವಂದೇ ವಂದು ಎಕ್ಸಿಡೆಂಟೂ ಮಾಡದಂವ ಹೇಳ್ವ ಹೆಗ್ಗಳಿಕೆ ಆವರೆಗೂ ಇತ್ತು ಅಂವಂಗೆ

ಕುಮಟಾ ಡಿಪೋ ದಲ್ಲಿ ತನ್ನ ಸೇವೆಯ ಕೊನೆಯ ಕೆಲ ವರ್ಷಗಳನ್ನ/ದಿನಗಳನ್ನ ಕಳೀತೇ ಇದಿದ್ದ.

ಆದರೆ ಡಿಪಾರ್ಟಮೆಂಟಿನಲ್ಲಿ ಪ್ರಾಮಾಣಿಕ ಸೀದಾ ಸರಳ ಸಹಜ ಮನುಷ್ಯನೇ ಆದರೂ  ಯಂಗಳಂಥ  ನವಯುವಕರಿಗೆ ಅಂವ "ಜಬ್ ಡ್ರೈವರ" ... ಅಂವ ಬಸ್ ಹತ್ತದಾ ಅಂದ್ರೆ 'ಇವತ್ ಹೆಬ್ಬಾನಕೆರೆ ಬಸ್ಸು ಲೇಟು' ಹೇಳೇ ಅರ್ಥ.

ಅಸಲಿಗೆ ಬಸ್ ಲೇಟಾಗ್ತಿತ್ತಿಲ್ಲೆ. ಸರಿಯಾದ ಟೈಮಿಗೆ ಹೊರಡ್ತಿತ್ತು ಬಸ್ಸು. ಸರಿಯಾದ ಸಮಯಕ್ಕೇ ಗಂತವ್ಯವ ಮುಟ್ಟಸ್ತಿದ್ದ ಅಂವ‌. ಆದರೆ  ಬೇರೆ ಡ್ರೈವರಂದಿಕ್ಕ ಇದ್ದಾಗ 5 ಗಂಟೆಗೆ ಕೂಪನಂಗಡಿಗೆ ಬಪ್ಪ ಬಸ್ಸು ಆ ದಿನ  ಐದೂಕಾಲಾಗ್ತಿತ್ತು.

ಇಲ್ಲಿ ಕೆ‍ಎಸ್ಸಾರ್ಟೀಸೀ ಬಸ್ಸಿನ ಬಿಡುವ ಸಮಯ ಮತ್ತು ತಲುಪುವ ಸಮಯದ ಬಗ್ಗೆ (ನಿಂಗಕ್ಕೆಲ್ಲ ಅರಿವಿದ್ದು ಆದ್ರೂವ) ಆ ರೂಟ್ ಗೊತ್ತಿಲ್ಲದವರಿಗಾಗಿ ಚುಟುಕಾಗಿ ಹೇಳವು.

ಬಿಡುವ ನಿಲ್ದಾಣದಿಂದ  ತಲುಪುವ ನಿಲ್ದಾಣದವರೆಗಿನ  ದೂರ ಮತ್ತು ನಡುವಣ ರಸ್ತೆಯ ಪರಿಸ್ಥಿತಿ ಮತ್ತು ನಡುವಣ ನಿಲುಗಡೆ ಮತ್ತು ಹೋಗುವ ಬಸ್ಸಿನ ಮಾದರಿಯನ್ನವಲಂಬಿಸಿ ಕಾಲನಿರ್ಣಯ ಮಾಡಿಟ್ಟಿರ್ತ.
ಅಂದ್ರೆ  ಕುಮಟಾದಿಂದ ಹೊರಟ ಬಸ್ಸು ವಾಲಗಳ್ಳಿ, ಕೂಜಳ್ಳಿ,  ಚಂದಾವರ, ಕೆಕ್ಕಾರ, ಕಡತೋಕ, ಹೆಬ್ಬಾನಕೆರೆ, ನೀಲಕೋಡ, ಅರೆಅಂಗಂಡಿ, ಸಂತೆಗುಳಿ, ಚಾಂದ್ರಾಣಿ  ಮಾರ್ಗವಾಗಿ ಹೊನ್ನಾವರ ತಲುಪಲೆ ಎಷ್ಟು ಸಮಯ ಬೇಕೋ ಅಷ್ಟು + ನಿಲುಗಡೆಯ ಸಮಯ + ರಸ್ತೆಯ ಪರಿಸ್ಥಿತಿಯಿಂದಾಗಿ ಅಪ್ಪ  ತಡ ಇದನ್ನೆಲ್ಲ ಸೇರಿಸಿ ಕಾಲನಿರ್ಣಯ ಮಾಡ್ತಿದ್ದ ಆವಾಗೆಲ್ಲವ. ಇದಕೆಲ್ಲ ಭಾರೀ ಟೀಮೇ ಇತ್ತನಪ !

ಹೌದು
ಸುಬ್ರಾಯ ಶೆಟ್ಟಿ ಹಂಗೇ  ಆಗಿದ್ದ

5 ಗಂಟೆಯ ಬಸ್ಸು ಹೇಳಾದ್ರೆ 10 ನಿಮಿಷ ಮೊದಲೇ ಬಂದು ಗಾಡಿ ಸ್ಟಾರ್ಟ್ ಮಾಡಿ... ಡುರ್ಡುರ್ ಗೆಡಸಿ... ಅದರ ಆವಾಜ್ ಮೇಲೇ ಗಾಡಿ ಸರಿ ಇದ್ದ ಇಲ್ಯ ನೋಡಿ ಗೊತ್ತಾಗ್ತಿತ್ತು ಅಂವಂಗೆ. ಸ್ಟಾರ್ಟ್ ಮಾಡಿದ ಮೇಲೆ ಮತ್ತೆ ಕೆಳಗಿಳದು ಹೋಗಿ ಪ್ರತೀ ಸಲ ಆರೂ ಚಕ್ರ ಸಮಾ ಇದ್ದ ಇಲ್ಯ ನೋಡ್ಕಂಡು... ಅದರ ಹವಾ ಚೆಕ್ ಮಾಡ್ಕ ಬಂದು ಮತ್ತೆ ಡ್ರೈವರ ಸೀಟಲ್ಲಿ ಕೂತ್ಗತಿದ್ದ ಪುಣ್ಯಾತ್ಮ ಅದು.

ಇಲ್ಲಿ‌ ಕೆಲವು ಮಾಹಿತಿಗಳು :
ಕುಮಟಾ ಡಿಪೋ
ಕೆ‍ಎಸ್ಸಾರ್ಟೀಸಿಯ ಕುಮಟಾ ಡಿಪೋ ಅಂದ್ರೆ ಕುಮಟಾ ಮತ್ತು ಹೊನ್ನಾವರ ಎರ್ಡೂ ತಾಲೂಕುಗಳೂ ಸೇರಿ ಒಂದು ಡಿಪೋ.

ಹೆಬ್ಬಾರ್ನಕೆರೆ ಬಸ್ಸು ಅಂದ್ರೆ -  ಕುಮಟಾ ಹೆಬ್ಬಾರ್ನಕೆರೆ ಮಾರ್ಗವಾಗಿ  ಹೊನ್ನಾವರ

ಚಿಪ್ಪಿಹಕ್ಕಲ ಬಸ್ಸು ಅಂದ್ರೆ - ಕುಮಟಾ ಚಿಪ್ಫಹಕ್ಕಲ ಹೆಬ್ಬಾರ್ನಕೆರೆ ಮಾರ್ಗವಾಗಿ ಹೊನ್ನಾವರ

ಎರ್ಡೂ ಬಸ್ಸುಗಳು ಈ ದೇವತೆಕೆರೆಯ ನಂತರ ರಾಮತೀರ್ಥದವರೆಗಿನ ಜನಕ್ಕೆ ಅನುಕೂಲವೇಯ.

ಕಥೆ ಅರ್ಥ ಅಪ್ಪಲೆ ಹೆಬ್ಬಾನಕೆರೆ ಯ ಗುರ್ತಿಲ್ದೋದವಕೆ ಈ ವಿವರ ಅಗತ್ಯ ಆದ್ದರಿಂದ ಹೇಳ್ದೆ‍.
ಆಗಲಿ
ಮುಂದೋಪನ ?

ಈ ಸುಬ್ರಾಯಶೆಟ್ಟಿಗೆ ಅದೊಂದು ಕರಾಳ ದಿನ.   ಆ ದಿನ ಯಾವಾಗನಂಗೇಯ ಸಮಯಾನುಸಾರ 5 ಗಂಟೆಯ ಹೆಬ್ಬಾನಕೆರೆ ಬಸ್ಸ್ ಹತ್ತಿ, ಸ್ಟಾರ್ಟ್ ಮಾಡಿ ತನ್ನ ದಿನಚರಿಯ ಕೆಲಸ ಮುಗಸಿ ಹೊರಟ - ಕುಮಟಾ ಬಸ್ ನಿಲ್ದಾಣದಿಂದವ.
ವಿಪರೀತ ಉಹೆಚ್ಚು ಮಳೆ ಆ ದಿನ.‌

ಕಂಡಕಂಡಲ್ಲಿ ರಸ್ತೆಯ ಮೇಲೆ ನೀರು ತುಂಬಿ ಹರೀತಿದ್ದದ್ದು ಚಂದಾವರ ಹೊಳೆಯ ನೆಗಸ ಮುಂದೆ ದೊಡ್ಡ ವಿಷ್ಯವೇ ಅಲ್ಲ.

ಚಂದಾವರ ಹೊಳೆಗೆ ಆಗ ಈಗಿಪ್ಪ ದೊಡ್ಡ ಬ್ರಿಜ್ ಆಗಿತ್ತಿಲ್ಲೆ. ಆಗ್ತಾ ಇದಿತ್ತು. ಕಟ್ಟುವ ಕೆಲಸ ನಡೀತಾ ಇತ್ತು. ಈಗಲೂ ಹೊಸ ಬ್ರಿಜ್‌ನಿಂದ ಕಾಂಬ ಹಳೇ ಸಣ್ಣ ಬ್ರಿಜ್ಜೇ ಆವಾಗಿನ ಸಂಪರ್ಕ ಸಾಧನ.

ತಗ ಸುಬ್ರಾಯ ಶೆಟ್ಟಿ ತನ್ನದೇ ವೇಗದಲ್ಲಿ  ವಾಲಗಳ್ಳಿ, ಕೂಜಳ್ಳಿ, ಮಲ್ಲಾಪುರ, ಚಂದಾವರ ನಾಕಾ ದಾಟಿ  ಹೊಳೆಯ ಹತ್ರ ತಂದ ತನ್ನ ಪ್ರೀತಿಯ ಬಸ್ಸ.‌

ಚಂದಾವರ ಹೊಳೆಯ ಪೂಲ್‌ ಮೇಲೇ  ನೆಗಸಿನ ನೀರು ತುಂಬಿ ಹರೀತಾ ಇದ್ದದ್ದ ಕಂಡ ಸುಬ್ರಾಯ ಶೆಟ್ಟಿ ಕಣ್ಣಳತೆಯಲ್ಲೇ ನೆಗಸ ಅರಿತು ಗಾಡಿ ನಿಲ್ಲಸದ್ದೊಂದೇ ಅಲ್ಲ.  ಸೈಡಿಗೆ ಹಚ್ಚಿ ಬಂದ್ ಮಾಡೇಬುಟ.

ಸಾಮಾನ್ಯವಾಗಿ ಆ ಬಸ್ಸಲ್ಲಿಪ್ಪದು 75% ಕಾಲೇಜ ಹುಡಗ್ರು. ನನ್ನ ಥರದ ಬಿಶಿರಕ್ತ ಮೇಲಿಂದ ಮ್ಯಾಣ.

"ಬಸ್ ದಾಟದೋದಂಥಾ ಮಹಾ ದೊಡ್ ನೆಗಸೆಲ್ಲ ಅಲ್ಲ ..‌ ದಾಟಿ ಹೋಗಲಕ್ಕ" ಅಂದ ವಬ್ಬಂವಾ

"ಬಸ್ಸಿನ ವಜ್ಜೆಗೆಲ್ಲ ನೆಗಸಲ್ವಾ.. ನಮ್ಮ ಗುಡ್ನಕಟ್ ನೆಗಸ ಮುಂದೆ ಇದೆಲ್ಲ ನೆಗಸ?!" ಅಂದ ನಾಯ್ಕರ ಪೋರ

"ತೊಂದ್ರಿಲ್ರಾ ದಾಟೋಗ್ತದೇ ಶೆಟ್ರೇ ..‌ಹೆದರುದ್ ಬೇಡ... ಹೊಡೀರಿ ಗಾಡಿ" ಅಂದ ಗಾಣಗರ ಪೋರ ಶ್ರೀನಾಥ.

" ಮಂಯಾತಾ... ಅಯ್ಯ ಸುಬ್ರಾಯ್ ಶೆಟ್ರು ಈ‌ ನೆಗಸಲ್ಲೆಲ್ಲ ಗಾಡಿ ಹೊಡದ್ರೆ.... ನರಿಯಣ್ಣ ಕಥೆ ಹೇಳ್ತದ್ಯೋ " ಅಂದ ಅಗ್ನೇತ್ರಿ ಮಾಣಿ.

"ಶೆಟ್ರಗೆ ಜೀಂವದ ಹೆದ್ರಕ್ಯ" ಅಂದ ನರಸಪ್ಪನ ಮನೆ ಮಾಣಿ.

"ನಾ 34 ವರ್ಷ ಡ್ರೈವರಕೆ ಮಾಡಿ ಅನುಭವ ಇದಿದ್ರೆ ಬಸ್ ನಿಲ್ಸೂದೇ ಇಲ್ಲಾಗಿತ್ತು" ಅಂದ ಎಲೆ ಸುಬ್ಬಣ್ಣ.

"ಅದಕೆಲ್ಲ ದಮ್ ಬೇಕಾ" ಅಂದ ಕೆಕ್ಕಾರ್ ಗಜು ಅಣ್ಣ.
ತಗ

ಪ್ವಾರಗಳ ಇಂಥ ಹಲವದ್ನೆಂಟು ಮಾತು ಮತ್ತೆ ಮೇಲಿಂದ ಕಂಡಕ್ಟರನೂ ಈ ಹುಡ್ಗಾಟಗತಿ ಹುಡುಗ್ರ ಸಾಥ್ ಕೊಟ್ನ ಇಲ್ಯ....
ಮೇಲಿಂದ ಅಲ್ಲೇ ನೆಗಸಿನ ಮಜ ನೋಡ್ತ ಇದ್ದ ಕೆಲವು ಲೋಕಲ್ ಮುಸಲ್ಮಾನ ಹುಡಗ್ರು "ಈಗ ಮಾತ್ರ ಮೋಹನ್ ಹೆಗಡ್ರ್ ಚಿಪ್ಪಿನ ಲಾರಿ ದಾಟಸ್ಗ ಹೋಗದೆ ಡ್ರೈವರೂ" ಅಂದ್ವ ಇಲ್ಯ...
ಸುಬ್ರಾಯ ಶೆಟ್ರ ಬಿಪಿ ಯೇರೋತು, ಸಹನೆ ಮೀರೋತು.

  ಹತ್ತೇಬುಟ್ರು ಗಾಡಿಯ.
ಸ್ಟಾರ್ಟ್ ಮಾಡಿ ಗುರ್ಗೆಡಸಿ ಫಸ್ಟ್ ಗೇರ್ ಹಾಕೇಬುಟ್ರು.

ಗಾಡಿ ಹೋತು ಮದಲು  ರಸ್ತೆಯ ಮೇಲೆ ....‌ಮತ್ತೆ ಆ ಶಿಥಿಲ ಸಣ್ಣ ಬ್ರಿಜ್ ಮೇಲೆ ..‌ ಸುಮಾರು ಅರ್ಧ ಬ್ರಿಜ್ ದಾಟದ್ದೇ ಆ ನೆಗಸಿನ ರಭಸಕ್ಕೆ ತಡದ್ದಿಲ್ಲೆ ಬಸ್ಸು. ಹೋಗೀ ಹೋಗಿ ತೇಲೋತು.

ಪುಣ್ಯಕ್ಕೆ ಹೊಸಾ ಬ್ರಿಜ್ ನ ಕನಸ್ಟ್ರಕ್ಷನ್ ನಡೀತಾ ಇತ್ತು. ಹೊಸ ಬ್ರಿಜ್ಜಿನ ಕಂಬಗಳು ಗಟ್ ಮುಟ್ಟಾಗಿತ್ತು... ಹೋಗಿ ಹೋಗಿ ಬಸ್ಸು ಆ ಹೊಸಾ ಬ್ರಿಜ್ಜಿನ (ಈಗಿನ ಬ್ರಿಜ್ಜು) ಕಂಬಕ್ಕೆ ತಾಡತು...

ದೇವರ ದಯವೋ,
ಸುಬ್ರಾಯ ಶೆಟ್ಟರ ಇಷ್ಟು ವರ್ಷಗಳ ಪ್ರಾಮಾಣಿಕ‌ ಸೇವೆಯ ಪುಣ್ಯದ ಫಲವೋ ವಂದೂ ಸಾವು ನೋವಾಜಿಲ್ಲೆ

ಅಕ್ಕ ಪಕ್ಕದ ಜನ ಬಂದು ಎಲ್ಲ ಪ್ರಯಾಣಿಕರನ್ನೂ ಬಚಾವ್ ಮಾಡದ.
ಆಗಬಹುದಿದ್ದ ಮಹಾ ದೊಡ್ಡ ದುರಂತವೊಂದು ತಪ್ಪಿತ್ತು.

ಆದರೆ ಈ ಘಟನೆಯಿಂದ ಇಡೀ ಜೀವಮಾನದ ಸೇವೆಯಲ್ಲಿ ವಂದೂ ತಪ್ಪು ಮಾಡದ, ಸೇವಾನಿವ್ರತ್ತಿಗೆ ಐದೋ ಆರೋ ತಿಂಗಳುಗಳು ಮಾತ್ರ ಬಾಕಿ ಇದ್ದ  ಸುಬ್ರಾಯ ಶೆಟ್ಟರ ವೃತ್ತಿ ಜೀವನದಲ್ಲೊಂದು ಕಪ್ಪು ಚುಕ್ಕೆ ಬಿದ್ದಾಗೋಗಿತ್ತು.

ಈ ಕಥೆಯ ನೀತಿ..
ನಮಗೆ ಸರಿಯಾಗಿ ಗೊತ್ತಿರುವ ಕೆಲಸದಲ್ಲಿ ಬೇರೆಯವರ ಸಲಹೆ ಅಥವಾ ಚಿತಾವಣೆಗೆ ಹೆಚ್ಚಿನ ಬೆಲೆ ಕೊಡಬಾರದು

ಅಡಿಬರಹ :
ಇದು ಸತ್ಯ ಘಟನೆ
ದಿನ ದಿನಾಂಕ ವರ್ಷ ಎಲ್ಲ ನೆನಪಿಲ್ಲೆ ಯಂಗೆ
ಹುಂ  ಆದರೆ ಕೆಲವು ಹೆಸರುಗಳು ಕಾಲ್ಪನಿಕ ( ಸೇರ್ಸಿದ್ದಿ)
ಜನ ಹೇಳ್ತ
ಹೇಳೂದೇ ಅವರ ಧರ್ಮ
ಹೇಳ್ಕಳ್ಳಿ ನಮಗೇನಡ !
ಆದರೆ ಕೊನೆಯಲ್ಲಿ ನಮಗೆ ಏನನಿಸ್ತೋ .. ನಮ್ಮ ಆತ್ಮ ಸಾಕ್ಷಿ ಏನು ಹೇಳ್ತೋ ಅದನ್ನೇ ಮಾಡವು ನಾವು

ನಮಸ್ಕಾರ
- ಶ್ಯಾಂ ಭಟ್
13/10/21
ದಿಲ್ಲಿ 

May 17, 2020

ಗುನಗನ ಕಷ್ಟ ಗುನಗಂಗೆ

ಹಣೆಬರಹ:
        'ಗುನಗ' ಎಂಬ ಅಡ್ಡ ಹೆಸರಿನ (Sirname) ಒಂದು ಪಂಗಡ ಇದೆ ಘಟ್ಟದ ಕೆಳಗೆ. ಸಾಮಾನ್ಯವಾಗಿ ಎಲ್ಲಾ ದೇವಸ್ಥಾನಗಳಲ್ಲಿ ವಾಲಗಕ್ಕೆ ಬಂಡಾರರು ಇರುವಂತೆಯೇ ಮೂಲತಃ ಈ ಗುನಗರೂ ಕೂಡ ದೇವರ ಸೇವೆಗಾಗಿಯೇ ಮುಡಿಪಾದ ಪ್ರಾಮಾಣಿಕ ಜನಾಂಗ.
     ಕೆಲವು ದೇವಸ್ಥಾನ ಗಳಲ್ಲಿ ಅದೂ ಸಾಮಾನ್ಯವಾಗಿ ಹೊರಾಂಗಣದ ದೇವರುಗಳಾದ ಜಟಗ, ಮಾಸ್ತಿ, ನಾಗರ,
ಚೌಡಿ ಇತ್ಯಾದಿಗಳನ್ನು ಕ್ಷುದ್ರ ದೇವತೆಗಳು ಅಥವಾ ಪರಿವಾರ ದೇವತೆಗೆಂದು ಕರೆಯುತ್ತಾರೆ. ಗ್ರಾಮ್ಯ ಭಾಷೆಯಲ್ಲಿ ಕೀಳ್ ದೇವರು ಅಂತಾರೆ. ಆ ವಿಷಯಕ್ಕೆ ನಾ ಹೋಗುವುದಿಲ್ಲ.
       ಸಾಮಾನ್ಯವಾಗಿ ಈ ಕ್ಷುದ್ರದೇವತೆಗಳ ಸ್ಥಾನಗಳಲ್ಲಿ ವಾರ್ಷಿಕವಾಗಿ ಬಂಡಿ ಹಬ್ಬವೆಂಬ ಸಂಪ್ರದಾಯ ಚಾಲ್ತಿಯಲ್ಲಿದೆ. ಈ ಬಂಡಿ ಹಬ್ಬದ ಆಕರ್ಷಕ ಸಂಪ್ರದಾಯ ವಿಶೇಷವೆಂದರೆ ಶ್ರೀ ದೇವರ ಕಲಶ ಮತ್ತು ಕೆಂಡ ಹಾಯುವ ಪ್ರಕ್ರಿಯೆ.       
       ಸಾಮಾನ್ಯವಾಗಿ ಈ ಶ್ರೀ ದೇವರ ಅಲಂಕೃತ ಕಲಶ ಹೊರುವವರು ಮೂಲತಃ ಗುನಗರ ವಂಶಜರು. ಇನ್ನು ಕೆಲವೆಡೆ ಬ್ರಾಹ್ಮಣರೇ ಗುನಗರ ಕೆಲಸ ಮಾಡುವುದೂ ಇದೆ. 
      ಕೆಂಡ ಹಾಯುವವರು ಸಾಮಾನ್ಯವಾಗಿ ಗೌಡರು ಮತ್ತೆ ಪಟಗಾರರು.
------

     ವಂದಾನೊಂದು ಕಾಲದಲ್ಲಿ ಹೀಂಗಿರ್ಪ ವಂದು ಬಂಡಿ ಹಬ್ಬದಲ್ಲಿ ... ಗುನಗನ ಕಷ್ಟದ ಕಥೆ ವ್ಯಥೆ ಇದು.
      ಈ ಕಲಶ ಹೊರುವ ಗುನಗರು ಸಾಮಾನ್ಯವಾಗಿ ವಂದ್ ವಾರ ಮದಲೇ ಎಲ್ಲಾ ತರದ ವೃತ ಮಾಡಿಕೊಂಡು... ದೇವಸ್ಥಾನ ಭಟ್ಟರೇ ಮಂತ್ರಿಸಿಕೊಟ್ಟ ಹೊಸ ಜನಿವಾರ ಧರಿಸಿ ಕಲಶ ಹೊರಲು ಸನ್ನದ್ಧರಾಗ್ತಾರೆ.
ಅವರ ಮಾತಿನಲ್ಲೇ ಹೇಳುವುದಾದರೆ "ರಾಶೀ ನಮನಿ ವೃತ ಅದೇ" ಎನ್ನುತ್ತಾರವರು.
ಆದರೆ ದೇವಸ್ಥಾನ ಭಟ್ಟರ ಕೇಳಿದರೆ "ಎಂತದೂ ಇಲ್ಲೇ ಬೆಳಿಗ್ಗೆ ಮಿಂದ್ಕ ಬಂದ್ರಾತು" ಎಂಬ ಉತ್ತರವಿರುತ್ತಿತ್ತು.

      ಆ ವರ್ಷದ ಬಂಡಿ ಹಬ್ಬದ ಸಮಯದಲ್ಲಿ ಪ್ರತೀ ವರ್ಷದಂತೇ ಕಲಶ ಹೊರುವ ಮುದುಕ ಗುನಗನ ಆರೋಗ್ಯ ಸರಿಯಿಲ್ಲದ ಕಾರಣ ಆತ ತನ್ನ ಮಗನಿಗೆ ಆ ಜವಾಬ್ದಾರಿ ವಹಿಸಿದ. ಈ ವರ್ಷ ಮೊದಲ ಬಾರಿಗೆ ಕಲಶ ಹೊರುವ ಅವಕಾಶ ಸಿಕ್ಕ ಮಗನಿಗಾದರೋ ಒಂಥರ ಹೆಮ್ಮೆ, ನೆಲದ ಮೇಲಿರಲಿಲ್ಲ ಆತ. ಹಾಗಾಗಿ ಈ ಮರಿ ಗುನಗ ಬಂಡಿ ಹಬ್ಬದ ದಿನ ಬೆಳಗಾ ಬೆಳಗ್ಗೆ ಎದ್ದು ಮಿಂದು ಗಿಂದು ತಯಾರಾದ.. ಅವಂಗೆ ಆ ದಿನ ಜೀವನದಲ್ಲೇ ಸಿಗದ ರಾಜ ಮರ್ಯಾದೆ. ಹಾರ ತುರಾಯಿ ಹಾಕಿ ದೇವರ ಹಂಗೇ ನೋಡುತ್ತಾರಲ್ಲ. ಆತನ ಖುಷಿಗೆ ಪಾರವೇ ಇಲ್ಲ.

     ಬೆಳಗಾ ಬೆಳಗ್ಗೆ ಎದ್ದು ಹೊಸದಾಗಿ ಖರೀದಿಸಿದ ಮಡಿಯನ್ನು ಭಟ್ಟರ ಹಂಗೇ ಉಡುವ ವಿಫಲ ಪ್ರಯತ್ನ ಮಾಡಿ.. ಅಂತೂ ಅಪ್ಪನ ಸಹಾಯದಿಂದ ಉಟ್ಟು... ದೇವಸ್ಥಾನದ ಬಾಗಿಲಲ್ಲಿ ಬಂದು ಕುಂತ ಮರಿ ಗುನಗ.
       ಭಟ್ಟರು ಯಾವಾಗಲೂ 'ಸಣ್ಣ ಗುನಗಾ ಬಂದ್ಯನಾ' ಎಂದು ಏಕವಚನದಲ್ಲಿ ಕರೆವವರು.. ಇಂದು ಮಡಿ ಉಟ್ಟ ಗುನಗಂಗೆ ಸಲ್ಪ ಜಾಸ್ತಿನೇ ಮರ್ಯಾದೆ ಕೊಟ್ಟು ಮಾತಾಡಿಸಿದರು.
"ಸಣ್ಣ ಗುನಗರೇ.. ಬಂದ್ರಾ?" ಎಂದು
"ಹೌದ್ರಾ ಭಟ್ರೇ" ಅಂದ ಗುನಗ.
"ಇಷ್ಟ್ ಬೇಗ ಮಡಿ ಹಚ್ಗ ಎಂತಾ ಮಾಡ್ತ್ರಿ ಗುನಗರೇ... ಮಧ್ಯಾಹ್ನ 4 ಗಂಟೆಗೆ ಮಡಿ ಹಚ್ಚಿರೆ ಸಾಕಾಗಿತ್ತನ" ಅಂದ್ರು ಭಟ್ಟರು
ಈತ ಇನ್ನೂ ಮೂರಿಂಚು ಏರಿ ಹೋದ.
"ಇಲ್ಲ ಇಲ್ರಾ.. ತೊಂದರಿಲ್ರಾ" ಅಂದ.
"ಸರಿ" ಅಂದ್ರು ಭಟ್ರು.
       ಸರಿ ಮಧ್ಯಾಹ್ನ ಕಲಶ ಹೊರುವ ಹೊತ್ತಾಯಿತು. ಮಡಿಯ ಸಮಸ್ಯೆ ಗೊತ್ತಿದ್ದ ಭಟ್ರು ಹೇಳಿದ್ರು... "ಗುನಗರೇ... ಮೂತ್ರ ಗೀತ್ರಕ್ಕೆ ಹೋಗುದಿದ್ರೆ ಮಡಿ ಬಿಚ್ಚಾಯ್ಕಂಡು ಹೋಗ್ ಬಂದ್ ಬುಡಿ.. ಕಡೆಗೆ ಕಲಶ ಹೊತ್ತ ಮೇಲೆ ಆಗೂದಿಲ್ಲ"
"ಇಲ್ರಾ ತೊಂದ್ರಿಲ್ಲರಾ" ಅಂದ ಗುನಗ

        ತಲೆಗೆ ಮಡಿಯನ್ನೇ ಮುಂಡಾಸಿನಂತೆ ಕಟ್ಟಿ ಕಲಶ ಇವನ ತಲೆ ಮೇಲಿಡಲಾಯ್ತು.
        ತಲೆಗೆ ಕಲಶ ಏರಿದ್ದೇ ತಡ... ತಗಳಿ ಗುನಗನಿಗೆ ಶುರುವಾಯ್ತು - 'ಭಾರ'.
'ಹುಂ ಹು ಹುಂ' ಎಂದು ನುಲಿತ ಶುರು ಮಾಡಿಕೊಂಡ.
         ಖಾಯಂ ಪದ್ದತಿ ಅದು ... ಅವನ ಅಜ್ಜನೂ.. ಅಪ್ಪನೂ ಹಾಗೆಯೇ ಮಾಡುವುದ ಚಿಕ್ಕಂದಿನಿಂದ ಕಂಡಿದ್ದ. ಹಾಂಗಾಗಿ ಇವನೂ ಮಾಡ್ದ.
         ಈ ಕಲಶ ಅಂದ್ರೆ .. ದೇವರ ಸಣ್ಣ ಮೂರ್ತಿಯ ಕಲಶದಲ್ಲಿಟ್ಟು ಶೃಂಗಾರಲಂಕಾರ ಮಾಡಿ ತಲೆಯ ಮೇಲೆ ಹೊತ್ತು ಇಡೀ ಊರ ತುಂಬ ನಿಗದಿತ ಸ್ಥಳಕ್ಕೆ ನಡೆದು ಹೋಗಿ... ಅಲ್ಲಲ್ಲಿ ಅದಕ್ಕೇ ಆದ ವಿಶೇಷ ಪೂಜೆ ಸ್ವೀಕರಿಸಿ ವಾಪಸ್ ಬರುತ್ತದೆ ಕಲಶ.
         ಈ ಪೂರಾ ಪ್ರಕ್ರಿಯೆಗೆ ಸುಮಾರು 5-6 ತಾಸಾದರೂ ಆಗುತ್ತದೆ. ಕಲ್ಪನೆ ಮಾಡಿಕೊಳ್ಳಿ... ಹೊತ್ತವನ ಅವಸ್ಥೆಯ. ಆ ಕಲಶ ಹೊತ್ತಷ್ಟು ಹೊತ್ತೂ ಆತ ಬಹಿರ್ದೆಶೆಗೆ ಕೂಡ ಹೋಗುವ ಹಾಗಿಲ್ಲ ಪಾಪ. ಅದಕ್ಕಾಗಿಯೇ ಭಟ್ಟರು ಆಗಲೇ ಹೇಳಿದ್ದರು. ಎಷ್ಟಂದ್ರೂ ಪೂಜೆ ಪುನಸ್ಕಾರಗಳ ಅನುಭವ ಅವರದ್ದು.

        ಹೀಗೆ ಕಲಶ ಹೊತ್ತು ಹೊರಟ ಗುನಗನಿಗೆ ಎರಡು ಮೂರು ಬದಿಯ ಪೂಜೆ ಪುನಸ್ಕಾರ ಮುಗಿಯುವಷ್ಟರಲ್ಲೇ ಮೂತ್ರ ಭಾಧೆ ಶುರುವಾಯ್ತು. ಪಾಪ ಬೆಳಗಿನಿಂದ ಭಟ್ರು ಹೇಳಿದರೂ ಕೇಳದೇ ಮಡಿ ಉಟ್ಟು ಕುಂತ ಪರಿಣಾಮ.
ಇಂಥ ಸಂದರ್ಭಗಳಲ್ಲಿ ಏನು ಮಾಡಬೇಕು ಎಂಬುದನ್ನು ಅನುಭವಿಯಾದ ಆತನ ಅಪ್ಪನೂ ಹೇಳಿರಲಿಲ್ಲ. ಹೇಳಬೇಕಿತ್ತು ... ಆದರೆ ಮರೆತಿರಬೇಕು. ಇವನೇನು ಮಾಡಬೇಕು ಪಾಪ. ಗುನಗನಿಗೆ ತಡೆಯಲಾರದ ಒತ್ತಡ ಶುರುವಾಯ್ತು.
ತಲೆಯ ಮೇಲೆ ಶ್ರೀ ದೇವರ ಕಲಶ. ಭಕ್ತಿ ಭಾರ ಎರಡೂ ಬರ್ತ್ತಾ ಇಲ್ಲ. ಧ್ಯಾನವೆಲ್ಲ ಆ ಒತ್ತಡದ ಕಡೆಯೇ.

          ಆಗ ಅಚಾನಕ್ಕಾಗಿ ಆತನ ತಲೆಯಲಿ ಒಂದು ಉಪಾಯ ಹೊಳೆಯಿತು !!
       ಸಾಮಾನ್ಯವಾಗಿ ಕೆಲವು ಬಾರಿ ಕಲಶ ಹೊತ್ತಾಗ 'ಭಾರ' ಬರುತ್ತದೆ ಹೊತ್ತವನಿಗೆ. ಭಾರ ಅಂದ್ರೆ ದೇವರೇ ಮೈ ಮೇಲೆ ಆಹ್ವಾಹನೆಯಾಗುವುದು.

         ಅಲ್ಲೇ ದಾರಿಯ ಪಕ್ಕದಲ್ಲಿನ ಒಂದು ಕೆರೆಯ ಹತ್ತಿರ ಬಂದಿದ್ದೇ ತಡ.. ಕಲಶಕ್ಕೆ ವಿಪರೀತ 'ಭಾರ'ದ ಆಹ್ವಾಹನೆಯಾಯ್ತು. ಮುಂದೆ ಹೋಗದೇ ಅಲ್ಲೇ ಸುತ್ತ ಗಿರಿಗಿರಿ ಸುತ್ತಲು ಶುರು ಮಾಡಿದ ಗುನಗ.
ಏನೇ ಪ್ರಯತ್ನ ಮಾಡಿದರೂ ಮುಂದೆ ಹೋಗುತ್ತಿಲ್ಲ ಕಲಶ.
         ಇಂಥ 'ಭಾರ' ಬಂದ ಪರಿಸ್ಥಿತಿಯಲ್ಲಿ ಅರ್ಚಕರು ಆ ದೇವರ ಹತ್ರ ಹೇಳಾಣೇಳಿಕೆ ಮಾಡಿಕೊಳ್ಳುತ್ತಾರೆ.... ಅವರಿಗೆ ದೇವರ ಭಾಷೆ ಅರ್ಥ ಆಗ್ತದೆ.
         ಸರಿ... ಭಟ್ಟರು ಹೇಳಾಣೇಳಿಕೆ ಶುರು ಮಾಡಿಕೊಂಡರು.
"ಶಾಂತ ಆಗಬೇಕು.. ಶಾಂತ ಆಗಬೇಕು... ಎಂತಾ ತಪ್ಪು ಆಯ್ತು ಹೇಳಿ ಹೇಳಬೇಕು.. ಯಾರು ನೀವು?"
"ಚೌಡೀ" ಅಂತು ಕಲಶ.
"ಯಾವ ಚೌಡಿ? ಏನಾಯ್ತು? ಸರಿಯಾಗಿ ಹೇಳಬೇಕು" ಭಟ್ರು ಮತ್ತೆ ಕೈ ಮುಗಿದರು.
"ಪ್ರತಿಷ್ಠೆ... ಚೌಡಿ" ಎಂದಿತು ಮತ್ತೆ ಕಲಶ ಕುಣಿಯುತ್ತ.
"ಕಳೆದ ವರ್ಷ ಅಷ್ಟೇ.. ಕಳಾಹೀನ ಆದ ಚೌಡಿಯ ಮೂರ್ತಿ ತೆಗದು ಹೊಸ ಮೂರ್ತಿ ಯಥಾ ಯೋಗ್ಯ ಪ್ರತಿಷ್ಠೆ ಮಾಡಿ ಆಗದೆ.. ಮತ್ತೆಂತ ಆಗಬೇಕು ಸ್ವಾಮಿನ್" ಅಂದ್ರು ಭಟ್ರು.
"ಹಳೇ ಮೂರ್ತಿ..." ಎಂದಿತು ದೇವರು.

ಆಗ ಭಟ್ಟರಿಗೆ 'ಧಸಕ್' ಎಂದು ಅರ್ಥ ಆಗಿ ಹೋಯ್ತು. ಎಷ್ಟಂದ್ರೂ ಮಂತ್ರ ತಂತ್ರಗಳ ಅರಿವಿದ್ದ ಅನುಭವಸ್ತ ಪೂಜಾರಿ ಅವರು.
"ಹೌದು ಮಹಾ ದೇವರೇ.. ಹಳೇ ಮೂರ್ತಿ ಇಲ್ಲೇ ಇದೇ ಕೆರೆಯಲ್ಲೇ ವಿಸರ್ಜನೆ ಮಾಡಿ ಆಗದೆ... ಈಗ ಎಂತಾ ಆಗಬೇಕು?" ಭಟ್ಟರ ಪ್ರಶ್ನೆ ಮತ್ತೆ.
"ಸೊಂಟ ಮುಳುಗುವಷ್ಟು ಎದೆ ಮಟ್ಟಕ್ಕೆ ನಿಲ್ಸೂ" ದೇವರ ಆಗ್ರಹ
ತಗಳಿ, ಅಷ್ಟು ಹೇಳಿದ್ದೇ ತಡ... ಭಟ್ರು ಬಂಡಾರಿಗಳಿಗೆ ಸಂಜ್ಞೆ ಮಾಡಿದರು.
ಕಲಶ ಕೆರೆಯತ್ತ ಹೊರಟಿತು. 

....ಅಲ್ಲಿಗೆ.....
ಎದೆಮಟ್ಟ ನೀರಿನಲ್ಲಿ ನಿಂತ ಕಲಶ ಹೊತ್ತ ಗುನಗನ ಜಲಬಾಧೆಯೂ ತೀರಿತ್ತು... ಚೌಡಿಯೂ ಶಾಂತವಾಗಿದ್ದಳು.

ಹಾಗಾಗಿ ಅದಕ್ಕೂ ನಂತರ ಈ ಗಾದೆ ನಮ್ಮಲ್ಲಿ ಚಾಲ್ತಿಯಲ್ಲಿದೆ.
"ಗುನಗನ ಕಷ್ಟ ಗುನಗಂಗೆ"
-------

ಅಫಿಡವಿಟ್:
ಇದು ಕಥೆಯಲ್ಲ ... ನಡೆದ ಘಟನೆ ಎಂದು ಹಿರಿಯರು ಹೇಳ್ತಿದ್ದರು. ಹಲವು ದಿನಗಳ ಹಿಂದೆ ಹಿರಿಯ ಶ್ರೀಕಾಂತ ಭಟ್ಟರು ಅವರದ್ದೇ ಮೂಡ್ ನಲ್ಲಿ ಈ ಕಥೆ ಹೇಳಿ ಮತ್ತೆ ನೆನಪಿನ ಮೆಲುಕು ಹಾಕಿದ್ದರು. ಮತ್ತೆ ಮೊನ್ ಮೊನ್ನೆ ಆದಿತ್ಯ ಸುಬ್ರಹ್ಮಣ್ಯ ಮತ್ತೆ ನೆನಪು ಮಾಡಿಕೊಟ್ಟ. ಅವರೆಲ್ಲರಿಗೂ ಧನ್ಯ.
ಇಂತಹ ಗ್ರಾಮೀಣ ಕಥೆಗಳ ಕಾಪಿಡುವ ಪ್ರಯತ್ನ ಅಷ್ಟೇ. ಯಾವುದೇ ಜನಾಂಗವ ಟೀಕಿಸುವುದಾಗಲೀ ... ವಿಮರ್ಶಿಸುವುದಾಗಲೀ ಅಥವಾ ಪರಿಚಯಕ್ಕಾಗಲೀ ಈ ಬರಹ ಅಲ್ಲ.

ನಮಸ್ಕಾರ.
ಶ್ಯಾಂ ಭಟ್, ಭಡ್ತಿ
17-05-2020


Jan 22, 2020

ಮುಂಬಯಿ

ಮಾಯಾನಗರಿ ಮುಂಬಯಿಯ ಜೀವಾಳ (ಲೈಫ್ ಲೈನ್) ಎಂದೇ ಕರೆಸಿಕೊಳ್ಳುವ ಲೋಕಲ್ ರೈಲಿನ ಪ್ರಯಾಣ ಅದೂ ಮಹಿಳೆಯರಿಗೆ ಎಷ್ಟು ಕಷ್ಟವೆ೦ಬುದನ್ನು ದಿನವೂ ಪ್ರಯಾಣಿಸುವ ನನ್ನ೦ತಹವರು ಮಾತ್ರವೇ ಹೇಳಬಲ್ಲರು. . ದಾದರ್ ನ ಆ ಜನನಿಭಿಢ ಸೆ೦ಟ್ರಲ್ ರೈಲ್ವೇ ಸ್ಟೇಶನ್ನಿನ ಪ್ಲಾಟ್ ಫಾರ್ಮ್ ನ ಕಡೆಗೆ ಲೋಕಲ್ ’ಹಿಡಿಯುವ’ ತರಾತುರಿಯಲ್ಲಿ ಓಡತೊಡಗಿದ್ದೆ. ಬಾ೦ದ್ರಾ ದಿ೦ದ ಥಾಣೆ ಗೆ ದಿನವೂ ಪ್ರಯಾಣ ನನ್ನ ನಿತ್ಯಕರ್ಮ. 8:14ರ ಫಾಸ್ಟ್ ಲೋಕಲ್ ತಪ್ಪಿದರೆ ನಾನು ಸಮಯಕ್ಕೆ ಸರಿಯಾಗಿ ನನ್ನ ಕರ್ತವ್ಯಕ್ಕೆ ತಲುಪಲಾರೆ. ತಲುಪಿಲ್ಲವೆ೦ದಾದರೆ.. ಎಂದೆಲ್ಲ ಮನದಲ್ಲಿ ಬ೦ದು ಓಡುವ ವೇಗ ತನ್ನಿ೦ತಾನೇ ಜಾಸ್ತಿಯಾಯ್ತು. ಮನೆ ಬಿಡಲು ಮೊದಲೇ ತಡವಾಗಿತ್ತು. ಬೆಳ್ಳಿಗ್ಗೆ ಜಗಳ ಮಾಡಿದ ತಮ್ಮನ ಮೇಲಿನ ಸಿಟ್ಟು ಇನ್ನೂ ತಣಿದಿರಲಿಲ್ಲ.

ಗಾಡಿ ಬ೦ದು ನಿ೦ತುಬಿಟ್ಟಿತ್ತಾದ್ದರಿ೦ದ... ಮಹಿಳೆಯರ ಕ೦ಪಾರ್ಟ್ಮೆ೦ಟ್ ವರೆಗೆ ತಲುಪುವುದು ಅಸಾಧ್ಯವೆ೦ದುಕೊ೦ಡು ಸಾಮಾನ್ಯ ಡಬ್ಬಕ್ಕೇ ನುಗ್ಗುವುದೆ೦ದುಕೊ೦ಡೆ . ಆ ತರಾತುರಿಯಲ್ಲಿ ಅಕ್ಕಪಕ್ಕದವರು ಗಮನಕ್ಕೆ ಬರುವುದಿಲ್ಲ. ಗಮನಿಸಿದರೆ ನೀವು ಗಾಡಿ ತಪ್ಪಿಸಿಕೊಳ್ಳುವುದು ಪಕ್ಕಾ... ನುಗ್ಗಾಟದ ಭರದಲ್ಲಿ ನನ್ನ ಬಲಗಡೆಯಿ೦ದ ಯಾರೋ ಒಬ್ಬ ನನ್ನನ್ನು ದಬ್ಬಿದ.. ಸಾಮಾನ್ಯವಾಗಿ ಲೋಕಲ್ ನಲ್ಲಿ ಇದು ಸಾಮಾನ್ಯವೇ ಆದರೂ ಹುಡುಗಿಯೊಬ್ಬಳನ್ನು ಹುಡುಗನೊಬ್ಬ ತಳ್ಳಿದನೆ೦ದರೆ ಅದು ಸಾಮಾನ್ಯ ವಿಷಯವಾಗಲಾರದು.

ತಮ್ಮನ ಮೇಲಿನ ಸಿಟ್ಟು ಇಮ್ಮಡಿಯಾಯ್ತು. ತಳ್ಳಿದ ಅನಾಮಧೇಯನಿಗೆ ಬಯ್ಯುವ ವಿವೇಚನೆಗೂ ಮೊದಲೇ ನನ್ನ ಕೈ ’ಚಟಾರ್’ ಎ೦ಬ ಶಬ್ದದೊ೦ದಿಗೆ ಆತನ ಕೆನ್ನೆಯನ್ನ ತಾಡಿಸಿತ್ತು. ಆತನ ಕಣ್ಣಿಗೆ ಹಾಕಿದ್ದ ಕಪ್ಪು ಗಾಜಿನ ಕನ್ನಡಕ ಬಿದ್ದು ಚೂರಾಯ್ತು.
ಆಗಲೂ ನನ್ನ ಸಿಟ್ಟು ಕಮ್ಮಿಯಾಗಲಿಲ್ಲ... ಮತ್ತೊ೦ದು ಬಿಡೋಣವೆ೦ದು ಅವನ ಕೆನ್ನೆಯ ಕಡೆಗೇ ಕೈ ಚಲಿಸಲಿತ್ತು. ಆಗಲೇ ನಾನು ಆತನ ಮುಖದತ್ತ ನನ್ನ ಗಮನ ಹರಿಯಿತು. -
ಎಡ ಪಾರ್ಶ್ವದ ಕಣ್ಣೇ ಇರಲಿಲ್ಲವಲ್ಲ ಅವನಿಗೆ. !!!!
ಆದ್ದರಿ೦ದಲೇ ಮು೦ದಿನ ಎಡ ಪಾರ್ಶ್ವ ಕಾಣುತ್ತಿರಲಿಲ್ಲ !!! ಅವನು ದಬ್ಬಿದ್ದರಲ್ಲಿ ಆತನ ತಪ್ಪಿರಲಿಲ್ಲ. "sorry ಮೇಡಮ್" ಎ೦ದ ಆತ ಒಡೆದುಹೋದ ಕನ್ನಡಕ ಹಾಗೂ ಅದರ ಚೂರುಗಳನ್ನು ಆಯ್ದುಕೊಳ್ಳತೊಡಗಿದ.

ಒಮ್ಮೆಲೇ ಕುಸಿದು ಹೋದೆ. ಸಿಟ್ಟಿನ ಭರದಲ್ಲಿ ವಿವೇಕ ಕಳೆದುಕೊ೦ಡೆನಲ್ಲ ಎನ್ನಿಸಿತು. ಮನಸ್ಸು ’ಛೀ’ ಎ೦ದ೦ತಾಯಿತು ಒಮ್ಮೆ.
ಕನ್ನಡಕದ ಚೂರುಗಳನ್ನು ಆಯ್ದು ಹೆಕ್ಕಿ ಕಸದ ಬುಟ್ಟಿಗೆ ಹಾಕಿಬ೦ದು "ಕ್ಷಮಿಸಿ ಮೇಡಮ್" ಎ೦ದ ಆತನ ಆ ಬಲಗಣ್ಣಿನ ಹೊಳಪಿನಲ್ಲಿ ತಪ್ಪಿನ ಭಾವ ಸರಿಯಾಗಿಯೇ ವ್ಯಕ್ತವಾಗುತ್ತಿತ್ತು.

  ನನ್ನ ಕಣ್ಣುಗಳು ತೇವವಾಗಿದ್ದವು... ಮ೦ಜಾಗಿದ್ದವು. ಮು೦ದಿನ ೩ ಟ್ರೈನ್ ಗಳನ್ನು ಹಿಡಿಯದಾದೆ.

12/06/2011 (ಹಿಂದೊಮ್ಮೆ ಇನ್ನೆಲ್ಲೋ ಗೀಚಿದ್ದು )

ಒಲವಿನ ಓಲೆ

ಪ್ರೀತಿಯ ಪುಟಾಣಿ ...


ನನ್ನ ಪ್ರೀತಿಯ ಹೇಗೆ ವರ್ಣಿಸಲಿ? ವರ್ಣನೆ ಬಿಡು - ಹೇಗೆ ತಿಳಿಸಿ ಹೇಳಲಿ ? ನಾನೆಷ್ಟು ನಿನ್ನ ಪ್ರೀತಿಸುವೆನೆಂದು ನಿನಗೆ ಅರ್ಥ ಮಾಡಿ ಹೇಳುವಷ್ಟು ಬುದ್ಧಿಯೂ ನನಗಿಲ್ಲ ಎನ್ನಲೇ? ಅಥವಾ ನನ್ನ ಭಾಷೆ ನಿನಗೆ ಅರ್ಥವಾಗದಷ್ಟು ಕೆಟ್ಟದಾಗಿದೆ ಎನ್ನಲೇ? ನಿನ್ನನ್ನೆಷ್ಟು ಪ್ರೀತಿಸುತ್ತೇನೆಂದು ಹೇಗೆ ಹೇಳಲಿ ಚಿನ್ನಾ?


ಹಾಗಂತ ನಿನ್ನ ನನ್ನ ಪ್ರೇಮ ಎಷ್ಟು ಗಾಢವಾದದ್ದೆಂದು ನಾವಿಬ್ಬರೇ ಅಲ್ಲ ನಿನ್ನಮ್ಮನೂ ಬಲ್ಲಳು. ನಿನ್ನ ಪ್ರೀತಿಯನ್ನು ಅರ್ಥ ಮಾಡಿಕೊಳ್ಳದಷ್ಟು ಮೂರ್ಖ ನಾನಲ್ಲ. ನಿನ್ನೆ ನನ್ನೆದೆಯ ಮೇಲೆ ಮಲಗಿ ನಿದ್ದೆ ಹೋದೆಯಲ್ಲ ಆಗಲೇ ಗೊತ್ತಾಯ್ತ ನಿನ್ನ ಪ್ರೀತಿಯ ಆಳ. ಇಂದು ನಿನ್ನ ಆ ಪುಟ್ಟ ಕೈಗಳ ಮೇಲೆ ನ ತಲೆಯಿಟ್ಟು ಮಲಗಿ ನಿನ್ನ ಭವಿಷ್ಯದ ಕನಸು ಕನಸಿದೆನಲ್ಲ - ನಿನ್ನ ಅದ್ಯಾವುದೋ ಭಾಷೆಯಿಂದ ನೀ ಏನೇನೋ ಗೊಣಗಿದೆಯಲ್ಲ... ಆ ಭಾಷೆ ನನಗರ್ಥವಾಗದಿದ್ದರೂ ನಿನ್ನ ಪ್ರೀತಿಯ ಅರಿತೆ ಮುದ್ದೂ . ಆ ನಿನ್ನ ಮೂಕ ಭಾಷೆಯಲ್ಲಿ ಎಷ್ಟೊಂದು ಒಲವಿತ್ತು !! ಆ ನಿನ್ನ ಒಂದೇ ಒಂದು ನಗು ನನ್ನ ಎಲ್ಲ ಚಿಂತೆಗಳನ್ನ ದೂರ ಮಾಡುತ್ತಲ್ಲ !! ಆಶ್ಚರ್ಯವಾಗ್ತಿದೆ ನನಗೆ.


ನಿನ್ನ ಮೇಲಿನ ನನ್ನ ಪ್ರೀತಿ.. ಅದು ಪ್ರೀತಿಯಾ?? ಪ್ರೇಮವಾ? ವಾತ್ಸಲ್ಯವಾ? ಅರಿಯಲಾರದಷ್ಟು ಅಜ್ಞಾನಿ ನಾನು. ನಿನಗೇನಾದರೂ ಅರ್ಥವಾದರೆ ದಯವಿಟ್ಟು ನನ್ನ ಭಾಷೆಯಲ್ಲಿ ... ನಂಗೆ ಅರ್ಥವಾಗುವ ತರಾ ಹೇಳ್ತೀಯ? ನಿನ್ನ ಭಾಷೆಯನ್ನು ಅರ್ಥೈಸಿಕೊಳ್ಳುವಷ್ಟು ಜ್ಞಾನ ನನಗಿಲ್ಲ ಪುಟ್ಟೀ.


I Love u .


27/3/2009 (ಹಿಂದೊಮ್ಮೆ ಇನ್ನೆಲ್ಲೋ ಗೀಚಿದ್ದು)